ಹುಬ್ಬಳ್ಳಿ̧ ಜುಲೈ 14: ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ತುಂಬಾ ದುಃಖದ ಸಂಗತಿ. ಈ ರೀತಿಯ ಘಟನೆ ನಡೆಯಬಾರದಿತ್ತು. ರೈತರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ರೂ.ಐದು ಲಕ್ಷ ಪರಿಹಾರ ಮತ್ತು ರಾಜ್ಯ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.
ಭರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಇತ್ತೀಚೆಗೆ ಮೃತರಾದ ರೈತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಭರದ್ವಾಡ ಗ್ರಾಮದ ರೈತರಾದ ರವಿರಾಜ ಬಸವರಾಜ ಜಾಡರ ಹಾಗೂ ಬಸನಗೌಡ ಶಿವನಗೌಡ ಪಾಟೀಲ ಅವರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು. ಸರ್ಕಾರದ ವತಿಯಿಂದ ಅವರ ಕುಟುಂಬಸ್ಥರಿಗೆ ಮನೆ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ನಮ್ಮ ಫೌಂಡೇಶನ್ ವತಿಯಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಬೆಳೆ ವಿಮೆ ಪರಿಹಾರವನ್ನು ಹಂತ ಹಂತವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ ವಿತರಣೆ ಮಾಡಲಾಗುವುದು. ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಹುಬ್ಬಳ್ಳಿ ಧಾರವಾಡ ನಡುವೆ ಇಆರ್ಟಿ ಸಾರಿಗೆ:
ಹುಬ್ಬಳ್ಳಿ ಧಾರವಾಡ ನಡುವೆ ಓಡಾಡುತ್ತಿರುವ ಬಿಆರ್ಟಿಎಸ್ (ತ್ವರಿತ ಬಸ್ ಸಾರಿಗೆ ವ್ಯವಸ್ಥೆ) ಬದಲಿಗೆ ಇಆರ್ಟಿ ಸಾರಿಗೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಸಾಧಕ ಬಾಧಕಗಳ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ನೀಡುವುದು ಸರ್ಕಾರದ ಮೂಲ ಧ್ಯೇಯವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ.ಎಸ್.ಅಕ್ಕಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಶೀಲ್ದಾರ ರಾಜು ಮಾವರಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.