ಗದಗ, ಜುಲೈ 18 : ಶ್ರಮ ಮೇವ ಜಯತೇ ಎಂಬ ನುಡಿಯಂತೆ ದೇಶದಲ್ಲಿ ಸಣ್ಣ ಸಣ್ಣ ವೃತ್ತಿಯನ್ನು ಮಾಡಿ ಶ್ರಮ ಜೀವಿಯಾಗಿ ವೃತ್ತಿಯನ್ನು ಅವಲಂಬಿಸಿಯೇ ಜೀವನ ನಡೆಸುತ್ತಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರಿದ್ದಾರೆ. ಈ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಅವರ ಜೀವನ ಮಟ್ಟ ಸುಧಾರಣೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು ಈ ಯೋಜನೆಯ ಸೌಲಭ್ಯ ಅಸಂಘಟಿತ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಎಸ್ ಲಾಡ್ ಅವರು ತಿಳಿಸಿದರು.
ನಗರದ ವಿವೇಕಾನಂದ ಸಭಾಂಗಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ ಕಾರ್ಡ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾಗಿದ್ದು ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ಒದಗಿಸಬೇಕೆಂಬುದು ಸರ್ಕಾರದ ಧ್ಯೇಯೋದ್ದೇಶವಾಗಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು ಸುಮಾರು 30 ರಿಂದ 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಸದರಿ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ಗಳನ್ನು ನೀಡಲಾಗುತ್ತಿದೆ. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಸೌಲಭ್ಯಗಳು ಕಾರ್ಮಿಕರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ವ್ಯಾಪಕ ಪ್ರಚಾರವೂ ಅತ್ಯಗತ್ಯವಾಗಿದೆ ಎಂದರು.
ಅಪಘಾತಗಳಿಂದ 18 ರಿಂದ 45 ವರ್ಷ ವಯೋಮಾನದ ಒಳಗಿನ ಜನರು ಶೇ. 50 ಜನರು ಮರಣ ಹೊಂದುತ್ತಿದ್ದಾರೆ. ವಾಹನ ಸಂಚಾರರ ಸುರಕ್ಷತೆಗಾಗಿ ಹೆಲ್ಮೆಟ್ ಕಡ್ಡಾಯಗೊಳಿಸಬೇಕು ಅಲ್ಲದೇ ಸಂಚಾರಿ ನಿಯಮಗಳ ಪಾಲನೆಯಾಗಬೇಕು ಆ ಮುಲಕ ಜೀವಹಾನಿ ನಿಯಂತ್ರಣ ಆಗಲಿ ಎಂದರು.
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೆಮಾಭಿವೃದ್ಧಿ ಮಂಡಳಿಯು ಚಾಲಕರು, ನಿರ್ವಾಹಕ, ಕ್ಲೀನರ್ , ನಿಲ್ದಾಣ ಸಿಬ್ಬಂದಿ , ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ಡಿಪೋ ಗುಮಾಸ್ತ , ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾರಕ, ಮೋಟಾರು ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಲೋಡಿಂಗ್ ಮತ್ತು ಆನ್ ಲೋಡಿಂಗ್ ಕಾರ್ಮಿಕರು, ಪಂಚರ್ ದುರಸ್ತಿ ಮಳಿಗೆಗಳಲ್ಲಿ, ವೀಲ್ ಬ್ಯಾಲೆನ್ಸಿಂಗ್ ಮತ್ತು ಆಲೈನ್ ಮೆಂಟ್ ಘಟಕಗಳಲ್ಲಿ, ನೀರಿನಿಂದ ಸ್ವಚ್ಛಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು, ಮೋಟಾರು ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ ಟಿಂಕರಿಂಗ್, ಎಲೆಕ್ಟ್ರಿಕಲ್ ಹಾಗೂ ಎಸಿ ಘಟಕ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಒಳಗೊಂಡಿದೆ ಎಂದರು.
ಗ್ಯಾರಂಟಿ ಯೋಜನೆಗಳ ಪ್ರಶಂಸೆ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡಜನರ ಬದುಕನ್ನು ಬಂಗಾರವಾಗಿಸಿವೆ. 500 ಕೋಟಿ ಹೆಣ್ಣು ಮಕ್ಕಳು ಶಕ್ತಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಮಹಿಳೆಯರಿಗೆ ರಾಜ್ಯದ ಮೂಲೆ ಮೂಲೆಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಸರ್ಕಾರದಿಂದ ಬಡಜನರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ 60,000 ಕೋಟಿ ವೆಚ್ಚ ಮಾಡಲಾಗುತ್ತಿದೆ ಕಾರ್ಮಿಕ ಸಚಿವ ಲಾಡ್ ಹೇಳಿದರು.
ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ. ಎಸ್. ಪಾಟೀಲ ಅವರು ಮಾತನಾಡಿ, ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿ ರಾಜ್ಯದ ಎಲ್ಲ ಅಸಂಘಟಿತ ಕಾರ್ಮಿಕರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಸಾಮಾಜಿಕ ಭದ್ರತೆ ಒದಗಿಸಿ ಅವರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಅರ್ಥಿಕವಾಗಿ ದುರ್ಬಲರಾಗಿದ್ದು ಸಂಘಟಿತ ಕಾಮಿಕರಿಗೆ ದೊರಕುವ ಎಲ್ಲ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೆ ದೊರಕಬೇಕೆಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ 25 ಸ್ಮಾಟ್ ಕಾರ್ಡ್ ಗಳನ್ನು, 4 ಅಪಘಾತ ಪರಿಹಾರ ಚೆಕ್, ಒಂದು ಆಶಾ ದೀಪ ಯೋಜನೆ ಚೆಕ್ ಅನ್ನು ಕಾರ್ಮಿಕ ಸಚಿವರು ವಿತರಿಸಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಮಿಕ ಆಯುಕ್ತರಾದ ಡಾ.ಎಸ್.ಬಿ. ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ. ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಗ್ಯಾರಂಟಿ ಸಮಿತಿ ಸದಸ್ಯ ಅಧ್ಯಕ್ಷ ಕೃಷ್ಣಗೌಡ ಎಚ್ ಪಾಟೀಲ, ಗದಗ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಸಹಾಯಕ ಕಾರ್ಮಿಕ ಆಯುಕ್ತರಾದ ಸಚಿನ್ ವೈ ಹಳೇಮನಿ , ಹಿರಿಯ ಕಾರ್ಮಿಕ ನಿರೀಕ್ಷಕರು ಕಾರ್ಮಿಕ ನಿರೀಕ್ಷಕರು, ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರು ಹಾಜರಿದ್ದರು.