ಹುಬ್ಬಳ್ಳಿ, ಮೇ 1: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನ್ ಬಚಾವೋ” ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಕೇವಲ ಒಂದು ಪದಾರ್ಥದ ಬೆಲೆ ಏರಿಸಲಿಲ್ಲ. ಅಕ್ಕಿ, ಚಿನ್ನ, ಬೇಳೆ, ಪೆಟ್ರೋಲ್, ಔಷಧ, ಗೊಬ್ಬರ ಹೀಗೆ ಎಲ್ಲಾ ವಸ್ತುಗಳ ಬೆಲೆ ಏರಿಸಿದರು ಎಂದರು.
ಬೆಲೆ ಏರಿಕೆ ನಿಯಂತ್ರಣ ಮಾಡಲೇ ಇಲ್ಲ. ಒಳ್ಳೆಯ ದಿನ ಬರುತ್ತೆ ಎಂದು ಹೇಳಿ ಎಲ್ಲಾ ಪದಾರ್ಥಗಳ ಬೆಲೆ ಏರಿಸಿದರು. ನಾವು ಹಾಲಿನ ಬೆಲೆ ಏರಿಕೆ ಮಾಡಿದೆವು. ಆದರೆ ಅದರ ಹಣವನ್ನು ರೈತರಿಗೆ ವರ್ಗಾವಣೆ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಬೆಲೆ ಏರಿಸಿ ಬಡವರ ಬದುಕನ್ನು ದುರ್ಬರ ಮಾಡಿದೆ ಎಂದರು.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಸುಲಿಗೆ ಮಾಡುತ್ತಿದೆ. ಇದರಿಂದ ಜನರ ಬದುಕು ಕಷ್ಟವಾಗುತ್ತಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಸಲ್ಲಿಸಿದರು.
ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ, ಸಂಪುಟ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.